ಭಟ್ಕಳ: ತಾಲೂಕಿನ ಸೋನಾರಕೇರಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಿದ್ಧಾರ್ಥ ಪದವಿಪೂರ್ವ ಕಾಲೇಜಿನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಏಪ್ರಿಲ್ 26, 2026 ರಂದು ಬೆಳಿಗ್ಗೆ 9:30ಕ್ಕೆ ಸರಸ್ವತಿ ಪೂಜೆಯೊಂದಿಗೆ ನೆರವೇರಲಿದೆ ಎಂದು ಸಿದ್ಧಾರ್ಥ ಎಜುಕೇಶನ್ ಟ್ರಸ್ಟ್ನ ವ್ಯವಸ್ಥಾಪಕ ನಿರ್ದೇಶಕಿ ಅರ್ಚನಾ ತಿಳಿಸಿದ್ದಾರೆ.

ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದ ಹಳೆಯ ಕಟ್ಟಡದಲ್ಲಿ ತರಗತಿಗಳನ್ನು ನಡೆಸಲಾಗುತ್ತಿತ್ತು. ಸ್ಥಳಾಭಾವದಿಂದಾಗಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಸಾಧ್ಯವಾಗುತ್ತಿರಲಿಲ್ಲ. ಇದೀಗ ಸುಸಜ್ಜಿತವಾದ ಹೊಸ ಕಟ್ಟಡ ನಿರ್ಮಾಣಗೊಂಡಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ತರಗತಿಗಳನ್ನು ಹೊಸ ಕಟ್ಟಡದಲ್ಲೇ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ. ಎಂ.ಕೆ. ನಾಯ್ಕ ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸತೀಶ ಬಿ. ನಾಯ್ಕ, ಎನ್ಐಟಿಕೆ ಸುರತ್ಕಲ್ನ ಸಹ ಪ್ರಾಧ್ಯಾಪಕ ಪ್ರೊ. ಜೋರಾ ಗೊಂಡ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಸುವಲ್ಲಿ ಕಾಲೇಜು ಸದಾ ಶ್ರಮಿಸುತ್ತಿದ್ದು, ಈಗಾಗಲೇ 35 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್ ಪೂರೈಸಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಿ.ಡಿ.ಎಸ್ ಹಾಗೂ ಆಯುರ್ವೇದ ಪದವಿಗಳನ್ನು ಪಡೆದವರನ್ನೂ ಒಳಗೊಂಡಂತೆ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಕ್ಷೇತ್ರಕ್ಕೆ ಪ್ರವೇಶ ಪಡೆದಿದ್ದಾರೆ. ಜೊತೆಗೆ ಐಐಟಿ ಹಾಗೂ ಎನ್ಐಟಿಗಳಲ್ಲೂ ವಿದ್ಯಾರ್ಥಿಗಳು ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವುದು ಸಂಸ್ಥೆಯ ಸಾಧನೆಯಾಗಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಪ್ರಕಾಶ ಖೆದ್ಲೆ, ಗಣಪತಿ ನಾಯ್ಕ, ಶ್ರೀನಿವಾಸ ನಾಯ್ಕ ಹಾಗೂ ಇತರರು ಉಪಸ್ಥಿತರಿದ್ದರು.
