ಭಟ್ಕಳ : ಜಿಲ್ಲೆಯ ಹಾಗೂ ತಾಲೂಕಿನ ಅತೀ ಪ್ರಸಿದ್ಧ ಕ್ಷೇತ್ರವಾದ ಸೋಡಿಗದ್ದೆ ಶ್ರೀ ಮಹಾಸತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದೆ. ಶಿಲಾನ್ಯಾಸ ಕಾರ್ಯಕ್ರಮದ ನಿಮಿತ್ತ ಮೇ 13 ಬುಧವಾರ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು… ಮೇ 14 ಗುರುವಾರ ಬೆಳಿಗ್ಗೆ 10: 10 ಕ್ಕೆ ದೇವಸ್ಥಾನದ ನೂತನ ಶಿಲಾಮಯ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಶ್ರೀ ಮಹಾಸತಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವಿದಾಸ ಮೊಗೇರ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿ, ದೇವಸ್ಥಾನವನ್ನು ಭಕ್ತರ ಶ್ರದ್ಧಾ-ಭಕ್ತಿಯ ಕೇಂದ್ರವಾಗಿಸುವುದರ ಜೊತೆಗೆ ಪ್ರೇಕ್ಷಣೀಯ ಧಾರ್ಮಿಕ ತಾಣವನ್ನಾಗಿ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದರು. ನೂತನ ಯೋಜನೆಗಾಗಿ ಸರ್ಕಾರದಿಂದ ರೂ. 9.95 ಕೋಟಿ ರೂ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲು ಅನುಮೋದನೆ ದೊರಕಿದ್ದು, ಈ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿಸುವ ಉದ್ದೇಶವೂ ಇದೆ ಎಂದು ಹೇಳಿದರು.
ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಆರ್.ಎನ್. ನಾಯ್ಕ, ಶಿವಾನಂದ ನಾಯ್ಕ, ಮಾಜಿ ಶಾಸಕರಾದ ಜೆ.ಡಿ. ನಾಯ್ಕ, ಸುನೀಲ ಬಿ. ನಾಯ್ಕ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಸುಧಾ ತಳವಾರ, ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಸೇರಿದಂತೆ ಉಭಯ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ ಅವರು ಈ ಕಾರ್ಯಕ್ರಮಕ್ಕೆ ಶ್ರೀ ಮಹಾಸತಿ ದೇವಿಯ ಎಲ್ಲ ಸದ್ಭಕ್ತರು ಆಗಮಿಸಬೇಕು ಎಂದು ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಸೋಡಿಗದ್ದೆ ಮಹಾಸತಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ನಾಗರಾಜ ಈ. ಹೆಚ್, ಸೋಡಿಗದ್ದೆ ಮಹಾಸತಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ನಾಗರಾಜ ಎಸ್. ನಾಯ್ಕ ಸೇರಿದಂತೆ ಮಾಸ್ತಿ ಜೆ . ನಾಯ್ಕ, ಮೋಹನ ನಾಯ್ಕ, ಸತೀಶ ನಾಯ್ಕ, ಚೋಳರಾಜ ಮೊಗೇರ, ಸತೀಶ ಜೆ. ನಾಯ್ಕ, ಮಂಜುನಾಥ ನಾಯ್ಕ, ದುರ್ಗಪ್ಪ ಮೊಗೇರ, ಶಂಕರ ಮೊಗೇರ, ಚೆನ್ನಯ್ಯ ಮೊಗೇರ, ಚಂದ್ರು ಮೊಗೇರ, ಮತ್ತಿತರರು ಉಪಸ್ಥಿತರಿದ್ದರು.

